ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

 ಶೀರ್ಷಿಕೆ: ತಾಯೆ ಬಾರ ಮೊಗವ ತೋರ

ಸಾಹಿತ್ಯ: ಮಂಜೇಶ್ವರ ಗೋವಿಂದ ಪೈ

ಸಂಗೀತ: ಜಿ.ಕೆ ವೆಂಕಟೇಶ್

ಚಿತ್ರ: ಕುಲವಧು (1963) (ಕನ್ನಡ)

ಮೂಲ ಗಾಯಕಿ: ಎಸ್‌.ಜಾನಕಿ

Cover By: Sarada




ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ

ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ

ನಮ್ಮ ತಪ್ಪನೆನಿತೊ ತಾಳ್ವೆ ಅಕ್ಕರೆಯಿಂದೆಮ್ಮನಾಳ್ವೆ

ನೀನೆ ಕಣಾ ನಮ್ಮ ಬಾಳ್ವೆ ನಿನ್ನ ಮರೆಯಲಮ್ಮೆವು

ತನು ಕನ್ನಡ ಮನ ಕನ್ನಡ ನುಡಿ ಕನ್ನಡವೆಮ್ಮವು.


ಹಣ್ಣನೀವ ಕಾಯನೀವ ಪರಿಪರಿಯ ಮರಂಗಳೋ

ಪತ್ರಮೀವ ಪುಷ್ಪಮೀವ ಲತೆಯ ತರತರಂಗಳೋ

ತೆನೆಕೆನೆಯ ಗಾಳಿಯೋ ಖಗಮೃಗೋರಗಾಳಿಯೋ

ನದಿ ನಗರ ನಗಾಳಿಯೋ ಇಲ್ಲಿಲ್ಲದುದುಳಿದುದೆ?


ಜೇನು ಸುರಿವ ಹಾಲು ಹರಿವ ದಿವಂ ಭೂಮಿಗಿಳಿದುದೆ?

ಬುಗುರಿಯೀಯೆ ಶಬರಿ ಕಾಯೆ ರಾಮನಿಲ್ಲಿ ಬಂದನೆ?

ಕನ್ನಡ ದಳ ಕೂಡಿಸಿ ಖಳ ದಶಾಸ್ಯನಂ ಕೊಂದನೆ?

ಪಾಂಡವರಜ್ಞಾತಮಿದ್ದ, ವಲಲಂ ಕೀಚಕನ ಗೆದ್ದ;

ಕುರುಕುಲಮಂಗದನ ಮೆದ್ದ ನಾಡು ನೋಡಿದಲ್ಲವೇ?

ನಂದನಂದನನಿಲ್ಲಿಂದ ಸಂದಿಗಯ್ದನಲ್ಲವೇ?


ಶಕವಿಜೇತನಮರ ಶಾತವಾಹನಾಖ್ಯನೀ ಶಕಂ,

ನಿನ್ನೊಳಂದು ತೊಡಗಿ ಸಂದುದರ್ಧ ಭರತದೇಶಕಂ

ಚಳುಕ್ಯರಾಷ್ಟ್ರಕೂಟರೆಲ್ಲಿ ಗಂಗರಾ ಕದಂಬರೆಲ್ಲಿ

ಹೊಯ್ಸಳ ಕಳಚುರ್ಯರೆಲ್ಲ ವಿಜಯನಗರ ಭೂಪರು

ಆಳ್ದರಿಲ್ಲಿಯಲ್ಲದೆಲ್ಲಿ ತಾಯೆ ಮೇಣಲೂಪರು.


ಜೈನರಾದ ಪೂಜ್ಯಪಾದ ಕೊಂಡಕುಂದವರ್ಯರ,

ಮಧ್ವಯತಿಯೆ ಬಸವಪತಿಯೆ ಮುಖ್ಯಮತಾಚಾರ್ಯರ

ಶರ್ವ ಪಂಪ ರನ್ನರ, ಲಕ್ಷ್ಮೀಪತಿ ಜನ್ನರ

ಷಡಕ್ಷರಿ ಮುದ್ದಣ್ಣರ ಪುರಂದರವರೇಣ್ಯರ

ತಾಯೆ ನಿನ್ನ ಬಸಿರೆ ಹೊನ್ನಗನಿ ವಿದ್ಯಾರಣ್ಯರ


ಹಳೆಯಬೀಡ ಬೇಲನಾಡ ಮಾಡಮೆನಿತೊ ಸುಂದರಂ,

ಬಿಳಿಯ ಕೊಳದ ಕಾರಕಳದ ನಿಡುಕರೆನಿತೊ ಬಂಧುರಂ,

ಇಲ್ಲಿಲ್ಲದ ಶಿಲ್ಪಮಿಲ್ಲ, ನಿನ್ನ ಕಲ್ಲೆ ನುಡಿವುದಲ್ಲ

ಹಿಂಗತೆಯಿನಿವಾಲಸೊಲ್ಲನೆಮಗೆ ತೃಷೆ ದಕ್ಕಿಸು

ಹೊಸತು ಕಿನ್ನರಿಯಲಿ ನಿನ್ನ ಹಳೆಯ ಹಾಡನುಕ್ಕಿಸು.


ಆರ್ಯರಿಲ್ಲಿ ಬಾರದಲ್ಲಿ ಬಾಸೆ ಎಲ್ಲಿ ಸಕ್ಕದಂ?

ನಿನ್ನ ನುಡಿಯಿನಚ್ಚುಪಡಿಯನಾಂತರೆನಿತೊ ತಕ್ಕುದಂ?

ಎನಿತೊ ಹಳೆಯ ಕಾಲದಿಂದ ಬರ್ದಿಲಮೀ ಬಾಸೆಯಿಂದ

ಕಾಲನ ಮೂದಲಿಸಿ ನಿಂದ ನಿನಗೆ ಮರೆವೆ ಹೊದೆವುದೆ?

ನಿನ್ನ ನುಡಿಗೆ ನಿನ್ನ ನಡೆಗೆ ಮುದುಪುಮೆಂದುಮೊದೆವುದೆ?


ತನ್ನ ಮರೆಯ ಕಂಪನರಿಯದದನೆ ಹೊರಗೆ ಹುಡುಕುವ

ಮೃಗದ ಸೇಡು ನಮ್ಮ ಪಾಡು ಪರರ ನುಡಿಗೆ ಮಿಡುಕುವ!

ಕನ್ನಡ ಕಸ್ತೂರಿಯನ್ನ ಹೊಸತುಸಿರಿಂ ತೀಡದನ್ನ

ಸುರಭಿ ಎಲ್ಲಿ ನೀನದನ್ನ ನವಶಕ್ತಿಯನೆಬ್ಬಿಸು

ಹೊಸ ಸುಗಂಧದೊಸಗೆಯಿಂದ ಜಗದಿ ಹೆಸರ ಹಬ್ಬಿಸು!


ನಿನ್ನ ಪಡೆಯ ಕತೆಯ ಕಡೆಯ ನುಡಿಯೆ ತಾಳಿಕೋಟೆಯು?

ಕಡಲಿನೊರತೆಗೊಳವೆ ಕೊರತೆ ಬತ್ತದು ನಿನ್ನೂಟೆಯು

ಸೋಲಗೆಲ್ಲವಾರಿಗಿಲ್ಲ ಸೋತು ನೀನೆ ಗೆದ್ದೆಯಲ್ಲ

ನಿನ್ನನಳಿವು ತಟ್ಟಲೊಲ್ಲ ತಾಳಿಕೋಟೆ ಸಾಸಿರಂ

ಬಾಹುಬಲದಿ ಮನೋಬಲದಿ ತಾಯೆ ಗೆಲುವೆ ಭಾಸುರಂ!


ಕುಗ್ಗದಂತೆ ಹಿಗ್ಗಿಪಂತೆ ನಿನ್ನ ಹೆಸರ ಟೆಕ್ಕೆಯಂ

ನೀಗದಂತೆ ಸಾಗಿಪಂತೆ ನಿನ್ನ ನುಡಿಯ ಢಕ್ಕೆಯಂ

ನಮ್ಮೆದೆಯಂ ತಾಯೆ ಬಲಿಸು ಎಲ್ಲರ ಬಾಯಲ್ಲಿ ನೆಲೆಸು

ನಮ್ಮ ಮನಮನೊಂದೆ ಕಲಸು ಇದನೊಂದನೆ ಕೋರುವೆ

ನಿನ್ನ ಮೂರ್ತಿ ಜಗತ್ಕೀರ್ತಿ ಎಂದಿಗೆಮಗೆ ತೋರುವೆ?


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




Post a Comment

ನವೀನ ಹಳೆಯದು